ರಾಯಚೂರು: ‘ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಧ್ವಜಾರೋಹಣ ನೆರವೇರಿಸಲಾಗಿದೆ’ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳಿಂದ ಜಿಲ್ಲೆಯಾದ್ಯಂತ ಗುರುವಾರ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.
ರಾಯಚೂರು ನಗರದಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿದ್ದರಿಂದ ವಾಹನ ಸಂಚಾರ ಸ್ಥಗಿತವಾಗಿತ್ತು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡುವಂತೆ ಆಗ್ರಹಪಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.