ಬೆಂಗಳೂರು : ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್ನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಶುಕ್ರವಾರದ ಕಲಾಪ ಬಲಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ವಾಗ್ವಾದ, ಆರೋಪ-ಪ್ರತ್ಯಾರೋಪಗಳ ಘೋಷಣೆ ಮೊಳಗಿ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಯಿತು.
ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಈಶ್ವರಪ್ಪ ವಿಷಯದ ಗದ್ದಲ ಆರಂಭಗೊಂಡಿದ್ದರಿಂದ ಕಲಾಪವನ್ನು 10 ನಿಮಿಷ ಮುಂದೂಡಲಾಯಿತು. ಮುಂದೂಡಿಕೆಯಾಗಿದ್ದ ಕಲಾಪ ಪುನಾರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಮಾತನಾಡಿ, ಸರ್ಕಾರದಿಂದ ಕ್ರಮದ ಭರವಸೆ ಸಿಗುವವರೆಗೂ ಧರಣಿ ಬಿಡಲ್ಲ. ಈಶ್ವರಪ್ಪ ವಜಾ ಆಗಲೇಬೇಕು ಎಂದರು.
ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ನಾರಾಯಣಸ್ವಾಮಿ, ಪ್ರಧಾನಿ ಮೋದಿಗೆ ಧಿಕ್ಕಾರ ಹಾಕಿದ್ದು ಸಂವಿಧಾನ ವಿರೋಧಿ. ಸಲೀಂ ಅಹಮದ್ ಅವರನ್ನು ಸದನದಿಂದ ಹೊರ ಹಾಕಬೇಕು ಎಂದು ಆಗ್ರಹಿಸಿದರು