ಆನವಟ್ಟಿ: ಶ್ರಮಿಕ ವರ್ಗವಾದ ಭೋವಿ ಜನಾಂಗ ಹೊಟ್ಟೆಪಾಡಿಗಾಗಿ, ಅಲೆಮಾರಿ ಹಾಗೂ ಅರೆಅಲೆಮಾರಿ ಬದುಕು ಕಟ್ಟಿಕೊಂಡಿದೆ. ಜನಾಂಗದ ಅಭಿವೃದ್ಧಿಗಾಗಿ ಸಂಘಟನೆ ಬಲಗೊಳಿಸುವ ಜೊತೆಗೆ ಶೈಕ್ಷಣಿಕ ಕ್ರಾಂತಿಯಾಗಬೇಕು ಎಂದು ಬಾಗಲಕೋಟೆ-ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.
ಇಲ್ಲಿಗೆ ಸಮೀಪದ ಹುರುಳಿ ಗ್ರಾಮದಲ್ಲಿ ತಾಲ್ಲೂಕು ಭೋವಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘವು ಸೋಮವಾರ ಹಮ್ಮಿಕೊಂಡಿದ್ದ ಸಿದ್ಧರಾಮೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಭೋವಿ ಜನಾಂಗದ ಜನಸಂಖ್ಯೆ ಒಂದು ಕೋಟಿಗೂ ಅಧಿಕವಾಗಿದೆ. ರಾಜಕೀಯವಾಗಿ ಉನ್ನತ ಸ್ಥಾನಮಾನ ಸಿಗದ ಕಾರಣ ಸಂಘಟನೆ ಸಾಧ್ಯವಾಗುತ್ತಿಲ್ಲ. ಸಮಾಜದ ಪ್ರತಿಯೊಬ್ಬರೂ ಸಂಘಟಿತರಾಗಿ ಹೋರಾಟ ಮಾಡುವ ಮೂಲಕ ರಾಜಕೀಯ ಸ್ಥಾನಮಾನಗಳನ್ನು ಪಡೆದು
ಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ದೇಶದಲ್ಲಿ ಕೆರೆ ನಿರ್ಮಾಣ, ಕೆರೆಗೆ ವಡ್ಡುಗಳ ನಿರ್ಮಾಣ, ಮಂದಿರ, ಮಹಲು, ಅಣೆಕಟ್ಟುಗಳ ನಿರ್ಮಾಣದಲ್ಲಿ ಭೋವಿ ಜನಾಂಗದವರ ಕೊಡುಗೆ ಅಪಾರ. ಆದರೆ, ಸಮುದಾಯವು ಸಾಮಾಜಿಕ, ಆರ್ಥಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸಮಾಜದ ಪ್ರತಿಯೊಬ್ಬರೂ ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಮುಂದಾಗಬೇಕು’ ಎಂದರು.