ಬೆಂಗಳೂರು: ನಗರದಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಮೂರು ಎಕರೆ ಜಮೀನು ಮಂಜೂರು ಮಾಡುವುದಾಗಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರನ್ನು ಶನಿವಾರ ಭೇಟಿ ಮಾಡಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು.
ಆಗ ಪ್ರತಿಕ್ರಿಯಿಸಿದ ಬೊಮ್ಮಾಯಿ, ಉತ್ತರ ಕರ್ನಾಟಕದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಮೂರು ಎಕರೆ ಜಮೀನು ಒದಗಿಸುವುದಾಗಿ ತಿಳಿಸಿದರು.
ಉತ್ತರ ಕರ್ನಾಟಕ ಭಾಗದಿಂದ ಬರುವ ಜನರ ಅನುಕೂಲಕ್ಕಾಗಿ ಕಟ್ಟಡ ನಿರ್ಮಾಣ, ಆ ಭಾಗದ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರ ಬಳಕೆಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಜಮೀನು ಮಂಜೂರು ಮಾಡಲಾಗುವುದು. ಶೀಘ್ರವೇ ಈ ಸಂಬಂಧ ಆದೇಶ ಹೊರಡಿಸಲಾಗುವುದು ಎಂದರು.
ಈ ಬಾರಿಯ ಬಜೆಟ್ನಲ್ಲಿ ಉತ್ತರ ಕರ್ನಾಟಕದ ಪ್ರಮುಖ ಯೋಜನೆಗಳಿಗೆ ಆದ್ಯತೆ ನೀಡುವಂತೆ ನಿಯೋಗ ಮನವಿ ಮಾಡಿತು. ಪರಿಶೀಲಿಸಿ, ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳುವುದಾಗಿ ಬೊಮ್ಮಾಯಿ ಭರವಸೆ ನೀಡಿದರು.