ಹಾವೇರಿ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ( ayusman arogya karnataka card ) ವಿತರಣೆ ಬಾಕಿ ಉಳಿದ ಮಕ್ಕಳಿಗೆ ಗ್ರಾಮ ಒನ್ ಕೇಂದ್ರಗಳಲ್ಲಿ ಎಬಿಎಆರ್ಕೆ ವಿತರಣೆಗೆ ವಿಶೇಷ ಅಭಿಯಾನ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಪೋಷಣ ಅಭಿಯಾನ, ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯವಿವಾಹ ನಿಷೇಧ ಹಾಗೂ ಪ್ರಧಾನ ಮಂತ್ರಿ ಮಾತೃವಂದನಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪ್ರತಿ ಮಾಹೆ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸುವಂತೆ ಸೂಚಿಸಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಹಾಗೂ ಬಾಲ್ಯ ವಿವಾಹದಿಂದ ರಕ್ಷಣೆಮಾಡಿದ ಬಾಲಕಿಯರ ಮೇಲೆ ಗಮನವಿರಿಸಬೇಕು ಹಾಗೂ ಕುಟುಂಬದ ಸಂಪರ್ಕದಲ್ಲಿರಬೇಕು. ಹುಡುಗರಿಗೆ 21 ವರ್ಷ ಹಾಗೂ ಹುಡುಗಿಯರಿಗೆ 18 ವರ್ಷತುಂಬಿದ ನಂತರ ಮದುವೆ ಮಾಡಬೇಕು. ಇದಕ್ಕೂ ಪೂರ್ವದಲ್ಲಿ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಕುರಿತು ಪಾಲಕರಿಗೆ ತಿಳುವಳಿಕೆ ನೀಡಬೇಕು. ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.