ಬೆಂಗಳೂರು: ಮುಂಬರಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಯಶಸ್ವಿನಿ ಯೋಜನೆ’ ಮರು ಜಾರಿ ಮೂಲಕ ಜಾತಿ, ಧರ್ಮಗಳನ್ನು ಮೀರಿ ಅರ್ಧ ಕೋಟಿ ಜನರ ಮನ ತಲುಪಲು ಮುಂದಾಗಿದ್ದಾರೆ.
ರಾಜ್ಯದಲ್ಲಿನ 30 ಜಿಲ್ಲೆಗಳಲ್ಲಿರುವ ಸಹಕಾರಿ ಸಂಘಗಳು, ಸೊಸೈಟಿಗಳು, ಪತ್ರಕರ್ತರ ಸಹಕಾರ ಸಂಘಗಳು, ಸಹಕಾರಿ ಬ್ಯಾಂಕ್, ಸ್ತ್ರೀ ಶಕ್ತಿ ಸಂಘ, ಸಾಂಸ್ಕೃತಿಕ ಸಹಕಾರ ಸೊಸೈಟಿಗಳ 43.42 ಲಕ್ಷ ಮಂದಿ ಯಶಸ್ವಿನಿ ಯೋಜನೆಯ ಫಲಾನುಭವಿಗಳಾಗಿದ್ದರು.
ಬಿಪಿಎಲ್ ಹಾಗೂ ಎಪಿಎಲ್ ತಾರತಮ್ಯವಿಲ್ಲದೇ ಪ್ರತಿಯೊಂದು ಕುಟುಂಬಕ್ಕೆ 2 ಲಕ್ಷ ರೂ.ವರೆಗೆ ವಾರ್ಷಿಕ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತಿತ್ತು. ಈಗ ಮರಳಿ ಯೋಜನೆ ಅನುಷ್ಠಾನಕ್ಕೆ ತರುತ್ತಿರುವುದರಿಂದ ಫಲಾನುಭವಿಗಳ ಸಂಖ್ಯೆ 50 ಲಕ್ಷದ ಸನಿಹಕ್ಕೆ ಬರಲಿದೆ.
ಉಚಿತ ಚಿಕಿತ್ಸೆ ಪಡೆಯಲು ಅವಕಾಶ: ಸದ್ಯ ರಾಜ್ಯದಲ್ಲಿ ಜಾರಿಯಲ್ಲಿರುವ ‘ಆರೋಗ್ಯ ಕರ್ನಾಟಕ ಯೋಜನೆ’ ಅನುಷ್ಠಾನ ವಿಳಂಬದಿಂದಾಗಿ ರಾಜ್ಯದಲ್ಲಿದ್ದ 43.42 ಲಕ್ಷ ಯಶಸ್ವಿನಿ ಫಲಾನುಭವಿಗಳ ಪೈಕಿ 30 ಲಕ್ಷದಷ್ಟು ಜನರಿಗೆ ಆರೋಗ್ಯ ಸೇವೆ ಲಭ್ಯವಾಗದಂತಾಗಿದೆ. ಇವರೆಲ್ಲ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆಯಬೇಕಿದ್ದು, ಆರ್ಥಿಕ ದುರ್ಬಲರು, ಮಧ್ಯಮ ವರ್ಗದ ಜನರಿಗೆ ಇದು ತುಂಬಾ ದುಬಾರಿಯಾಗುತ್ತಿದೆ. ಈಗ ಇವರಿಗೆಲ್ಲ ಮತ್ತೆ ಯಶಸ್ವಿನಿ ಯೋಜನೆ ಜಾರಿಯಾದಲ್ಲಿ ಉಚಿತ ಚಿಕಿತ್ಸೆ ಪಡೆಯಲು ಅವಕಾಶ ಸಿಕ್ಕಂತಾಗಲಿದೆ.
ಸ್ಥಗಿತಗೊಂಡಿದ್ದ ಯೋಜನೆ ಮರು ಜಾರಿ:ಸರ್ಕಾರದ ಈ ನಿರ್ಧಾರದಿಂದಾಗಿ ಯೋಜನೆಯ ಫಲಾನುಭವಿಗಳು ದೊಡ್ಡ ಪ್ರಮಾಣದಲ್ಲಿ ಕೇಸರಿ ಪಕ್ಷದ ಕಡೆ ವಾಲುತ್ತಾರೆ. ಚುನಾವಣೆಯಲ್ಲಿ ಇದು ಸಹಕಾರಿಯಾಗಲಿದೆ ಎನ್ನುವುದು ಬೊಮ್ಮಾಯಿ ಅವರ ಲೆಕ್ಕಾಚಾರವಾಗಿದೆ.
ಹಾಗಾಗಿ ಯಾವುದೋ ಹೊಸ ಜನಪ್ರಿಯ ಯೋಜನೆ ಘೋಷಿಸಿ ಜನಪ್ರಿಯತೆ ಗಳಿಸುವ ಬದಲು ಸ್ಥಗಿತಗೊಂಡಿದ್ದ ಜನಪ್ರಿಯ ಯೋಜನೆಯನ್ನೇ ಮರು ಜಾರಿ ಮಾಡಿ ಜನಪ್ರಿಯತೆ ಗಳಿಸಿಕೊಳ್ಳುವ ಮೂಲಕ ಒಂದೇ ಕಲ್ಲಿಗೆ ಬೊಮ್ಮಾಯಿ ಎರಡು ಹಕ್ಕಿ ಹೊಡೆಯುತ್ತಿದ್ದಾರೆ.