ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರುವ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಸಿಬ್ಬಂದಿ ಕೊರತೆ ಎದುರಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಮಂಜೂರಾತಿ ಕೋರಿ ಪ್ರಸ್ತಾವನೆ ಸಲ್ಲಿಸಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಈ ಬಗ್ಗೆ ಒಲವು ತೋರಿಸಿಲ್ಲ. ಇದು ಪ್ರಕರಣಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.
ಇತ್ತೀಚಿನ ದಿನಗಳಲ್ಲಿ ಬಿಡಿಎ, ಬಿಬಿಎಂಪಿ ಹಾಗೂ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳ ಮೇಲೆ ಎಸಿಬಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಪ್ರಮಾಣ ಸಂಪತ್ತು ಪತ್ತೆ ಹಚ್ಚಿದ್ದ ಅಧಿಕಾರಿಗಳಿಗೆ ಕಾರ್ಯದೊತ್ತಡ ಹೆಚ್ಚಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಕೊರತೆ ಪರಿಣಾಮ ತ್ವರಿತಗತಿಯಲ್ಲಿ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲು ವಿಳಂಬವಾಗುತ್ತಿದೆ. ಸಮಸ್ಯೆಗೆ ಇತಿಶ್ರೀ ಹಾಡಲು ಹೆಚ್ಚಿನ ಸಂಖ್ಯೆಯಲ್ಲಿ 140 ಅಧಿಕಾರಿ/ ಸಿಬ್ಬಂದಿಗೆ ಮಂಜೂರಾತಿಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿದರೂ ರಾಜ್ಯ ಸರ್ಕಾರ ಕ್ಯಾರೆ ಅಂದಿಲ್ಲ. ಇದರಿಂದ ಅಧಿಕಾರಿ ವರ್ಗ ಒತ್ತಡದಲ್ಲಿಯೇ ಕಾರ್ಯನಿರ್ವಹಿಸಬೇಕಾಗಿದೆ.
ಲೋಕಾಯುಕ್ತದಲ್ಲಿ 747, ಎಸಿಬಿಯಲ್ಲಿ 447 ಸಿಬ್ಬಂದಿ: 2016ರಲ್ಲಿ ಉದಯವಾದ ಎಸಿಬಿಯು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎಂಟು ವಲಯಗಳ ವಿಭಾಗಗಳಿವೆ. ದಲಾಯತ್, ಲಿಪಿಕ ಸಿಬ್ಬಂದಿ ಹುದ್ದೆಗಳು ಹೊರತುಪಡಿಸಿದರೆ ಒಟ್ಟು 447 ಕಾರ್ಯಕಾರಿ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದಾರೆ. ಪೊಲೀಸ್ ಸ್ಟೇಷನ್ ಬಲ ಇಲ್ಲದಿರುವ ಲೋಕಾಯುಕ್ತದಲ್ಲಿ 747 ಕಾರ್ಯಕಾರಿ ಸಿಬ್ಬಂದಿಗಳಿದ್ದಾರೆ. ಎಸಿಬಿಗೆ ಹೋಲಿಸಿದರೆ ಲೋಕಾಯುಕ್ತದಲ್ಲಿ 300 ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.