ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬದಲಾವಣೆ ಮಾಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಸಲಹೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿ, ಬದಲಾವಣೆಯ ಬಗ್ಗೆ ರಾಹುಲ್ ಗಾಂಧಿ ಪ್ರಧಾನಿ ಆದರೆ ಸಿದ್ದರಾಮಯ್ಯ ಹೋಗಿ ಕೇಳಲಿ. ಈಗ ಕೇಳೋದಲ್ಲ. ಡಿಜೆಹಳ್ಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿ. ಅವರು ಸ್ವತಂತ್ರರು ಎಲ್ಲಿಗೆ ಬೇಕಾದರೂ ಹೋಗಬಹುದು ಎಂದರು.
ಕೇಂದ್ರದಿಂದ ರಾಜ್ಯದ ಜಿಎಸ್ಟಿ ಪಾಲು ಖೋತಾ ಆಗಿದೆ ಅನ್ನೋದು ಸರಿ. ಆದರೆ ಈ ಬಗ್ಗೆ ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳು ಏನ್ ಮಾಡಬೇಕು ಎಂಬುದರ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ನಾವು ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಇಳಿದು ಹಣ ಪಡೆಯಲ್ಲ. ಕಾಂಗ್ರೆಸ್ಸಿನವರಿಗೆ ಪದೇ ಪದೇ ಘರ್ಷಣೆ ಮಾಡೋದು ಅಭ್ಯಾಸ. ಆದರೆ ನಮಗೆ ರಾಜ್ಯದ ಅಭಿವೃದ್ಧಿ ಹೇಗೆ ಮಾಡಬೇಕು ಎಂಬುದು ಗೊತ್ತಿದೆ ಅದನ್ನು ನಾವು ಮಾಡುತ್ತೇವೆ ಎಂದರು.