ಬೆಂಗಳೂರು:ಗುತ್ತಿಗೆದಾರ ಸಂತೋಷ ಪಾಟೀಲ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬಲಿಪಶು ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಮಾಡಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ ಪಕ್ಷದ ಕಾರ್ಯಕರ್ತರಿಗೆ ಕೋಟ್ಯಂತರ ರೂಪಾಯಿ ಗುತ್ತಿಗೆಯನ್ನು ವರ್ಕ್ ಆರ್ಡರ್ ಇಲ್ಲದೆ, ಟೆಂಡರ್ ಕರೆಯದೇ ಬಾಯಿ ಮಾತಿನಲ್ಲಿ ಕಾಮಗಾರಿ ಕೊಡುತ್ತಿದ್ದಾರೆ, ನಂತರ ಹಣ ಪಾವತಿ ಮಾಡುತ್ತಿದ್ದಾರೆ ಎಂಬುದೂ ಈ ಪ್ರಕರಣದಿಂದ ಬಹಿರಂಗವಾಗಿದೆ. ಇದು ನಿಯಮ ಬಾಹಿರ ಹಾಗೂ ಪಕ್ಷಪಾತದಿಂದ ಕೂಡಿದೆ, ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.