ಬೆಂಗಳೂರು: ಕೇಂದ್ರ ಸರ್ಕಾರದ ವಿಶ್ವಾಸದ್ರೋಹಕ್ಕೆ ತಲೆಬಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ತೀರ್ಮಾನಿಸುವ ಮೂಲಕ ರಾಜ್ಯದ ಜನತೆಯನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಾಲಮಾಡಿಯಾದರೂ ಕೊರೊನಾ ನಿಯಂತ್ರಿಸುತ್ತೇನೆ, ಪ್ರವಾಹ ಪೀಡಿತರ ಪರಿಹಾರ ನೀಡುತ್ತೇನೆ, ಸರ್ಕಾರಿ ನೌಕರರ ಸಂಬಳಕ್ಕೆ ಸಾಲ ಮಾಡುತ್ತೇನೆ… ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪ್ರತಿಯೊಂದಕ್ಕೂ ಸಾಲದ ಮಂತ್ರ ಪಠಿಸುತ್ತಾ ಬಂದಿದ್ದಾರೆ.. ಇವರೇನು ರಾಜ್ಯ ಸರ್ಕಾರವನ್ನು ದಿವಾಳಿ ಮಾಡಲು ತೀರ್ಮಾನಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.