ನವದೆಹಲಿ,ಸೆ.5- ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 47 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದರು.
ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಲಿಂಕ್ ಮೂಲಕ ಪ್ರಶಸ್ತಿಗಳನ್ನು ನೀಡಿ ಮಾತನಾಡಿದ ರಾಷ್ಟ್ರಪತಿಯವರು, ಉತ್ತಮ ಕಟ್ಟಡ, ದುಬಾರಿ ಸೌಲಭ್ಯಗಳು ಇರುವ ಶಿಕ್ಷಣ ಸಂಸ್ಥೆಗಳಿಂದ ಉತ್ತಮ ವಿದ್ಯಾರ್ಥಿಗಳು ಸೃಷ್ಟಿಯಾಗುವುದಿಲ್ಲ.
ಬದಲಿಗೆ ಒಳ್ಳೆಯ ಶಿಕ್ಷಕರಿಂದ ಮಾತ್ರ ಉತ್ತಮ ವಿದ್ಯಾರ್ಥಿಗಳು ಸೃಷ್ಟಿಯಗುತ್ತಾರೆ. ಆ ಮೂಲಕ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಉತ್ತಮ ಸಮಾಜದಿಂದ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರು ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ಗಣಿತ ಮತ್ತು ವಿಜ್ಞಾನದ ಕಷ್ಟದ ವಿಷಯಗಳನ್ನು ಅತ್ಯಂತ ಸರಳ ಮತ್ತು ಸುಲಭ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಕಲಿಸುವುದರಲ್ಲಿ ಹೊಸ ಹೊಸ ವಿಧಾನ ಮತ್ತು ಅನ್ವೇಷಣೆಗಳನ್ನು ಅನುಷ್ಠಾನಗೊಳಿಸಿದ್ದಾರೆ ಎಂದು ಕೋವಿಂದ್ ಮೆಚ್ಚುಗೆ ಸೂಚಿಸಿದರು.