ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ನಿಂದ ವಲಸೆ ಪರ್ವ ಆಗದಂತೆ ನೋಡಿಕೊಳ್ಳಲು ಹೈಕಮಾಂಡ್ ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದೆ.
ಬಿಜೆಪಿ ಹಳೇ ಮೈಸೂರು ಭಾಗದ ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿಕೊಂಡಿದ್ದು, ಮಾಜಿ ಸಂಸದ ಮುದ್ದಹನುಮೇಗೌಡ ಸೇರಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಹಾಗೂ ಮೈಸೂರು ಭಾಗದವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಪಡೆದಿರುವ ಹೈಕಮಾಂಡ್, ಸ್ವಸಾಮರ್ಥ್ಯ ಹಾಗೂ ಪ್ರಭಾವ ಇರುವವರು ಪಕ್ಷ ತ್ಯಜಿಸದಂತೆ ನೋಡಿಕೊಳ್ಳಲು ಸೂಚಿಸಿದೆ.
ಚುನಾವಣೆಗೆ ಇನ್ನೊಂದು ವರ್ಷ ಇರುವಾಗ ನಾಯಕರ ವಲಸೆ ಬೇರೆ ರೀತಿಯ ಪರಿಣಾಮ ಬೀರಬಹುದೆಂಬ ಆತಂಕ ಹೈಕಮಾಂಡ್ ನಾಯಕರದು. ಹೀಗಾಗಿಯೇ, ಪಕ್ಷದ ಆಂತರಿಕ ಸಮಸ್ಯೆಯಿಂದ ಯಾರೂ ಪಕ್ಷ ತ್ಯಜಿಸುವಂತಾಗಬಾರದು. ನಾಯಕರ ನಡುವೆ ವ್ಯತ್ಯಾಸ ಇದ್ದರೆ ಸ್ಥಳೀಯವಾಗಿ ಕರೆದು ಬಗೆಹರಿಸಿ ಎಂದು ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.