ಶಿವಮೊಗ್ಗ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
‘ಪಿಎಸ್ಐ ಹಗರಣ ಕುರಿತು ಸಿಐಡಿ ವಿಶೇಷ ತನಿಖೆ ನಡೆಸುತ್ತಿದೆ. ಈಗಾಗಲೇ ಕಲಬುರಗಿಯಲ್ಲಿ ₹ 1 ಕೋಟಿ, ಬೆಂಗಳೂರಿನಲ್ಲಿ ₹ 2.19 ಕೋಟಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. ವಿಶೇಷ ನ್ಯಾಯಾಲಯದ ಬಗ್ಗೆಯೂ ಚೀಂತಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
‘ಕಾಂಗ್ರೆಸ್ ಕಾಲದಲ್ಲಿಯೇ ಇಂತಹ ಘಟನೆಗಳು ಹೆಚ್ಚಾಗಿ ನಡೆದಿವೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ವಿಷಯ ಗಮನಕ್ಕೆ ಬಂದ
ತಕ್ಷಣವೇ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ. ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ. ಕಷ್ಟಪಟ್ಟು ವ್ಯಾಸಂಗ ಮಾಡಿದವರಿಗೆ ಅನ್ಯಾಯವಾಗಬಾರದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಮರು ಪರೀಕ್ಷೆ ದಿನಾಂಕ ಇನ್ನೂ ನಿಗದಿಯಾಗಿಲ್ಲ’ ಎಂದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಭೇಟಿಯಲ್ಲಿ ವಿಶೇಷವೇನಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಹೋಗಿಲ್ಲ. ಸರ್ಕಾರಿ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.