ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಪಯಣವನ್ನು ಮುಗಿಸಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
ಹೌದು, ಇಂದು ( ಮೇ 27 ) ಅಹಮದಾಬಾದಿನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪ್ರತಿಷ್ಟಿತ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್ 7 ವಿಕೆಟ್ಗಳ ಭರ್ಜರಿ ಜಯವನ್ನು ಸಾಧಿಸಿದೆ.
ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ 14 ಆವೃತ್ತಿಗಳಂತೆ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿಯೂ ಟ್ರೋಫಿ ಇಲ್ಲದೇ ಬರಿಗೈನಲ್ಲಿ ಟೂರ್ನಿಯಿಂದ ಹೊರಬಿದ್ದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 158 ರನ್ಗಳ ಗುರಿಯನ್ನು ನೀಡಿತು. ರಾಜಸ್ಥಾನ್ ರಾಯಲ್ಸ್ ತಂಡದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಉತ್ತಮ ಬೌಲಿಂಗ್ ಮಾಡಿ ಈ ಮೊತ್ತವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಹಲವಾರು ಅಭಿಮಾನಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ಗಳ ಮೇಲೆ ಭರವಸೆಯನ್ನು ಇಟ್ಟುಕೊಂಡಿದ್ದರು. ಆದರೆ ಅಭಿಮಾನಿಗಳ ಈ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಸೋಲನ್ನು ಅನುಭವಿಸಿ ನಿರಾಸೆಯನ್ನು ಉಂಟುಮಾಡಿದೆ.