ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ.
2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ ಬೇಡಿಕೆಯಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೂ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟ ಹೇಳಿದೆ.
ಕಮಿಷನ್ ಹೆಚ್ಚಳ ಮಾಡಬೇಕೆಂದು ಕೇಂದ್ರದ ಪೆಟ್ರೋಲಿಯಂ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಯವರಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನಾವು ಪ್ರತಿಭಟನೆ ದಾರಿ ಹಿಡಿದಿದ್ದೇವೆ. ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟಿಸಲು ಮುಂದಾಗಿದ್ದೇವೆ. ನಾಳೆ ತೈಲ ಖರೀದಿಯನ್ನು ಸಂಪೂರ್ಣವಾಗಿ ಬಂದ್ ಮಾಡುತ್ತೇವೆ ಎಂದು ಒಕ್ಕೂಟದ ಮುಖಂಡರು ಹೇಳಿದ್ದಾರೆ.
2017ರಲ್ಲಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಇಂದಿಗೆ ಹೋಲಿಕೆ ಮಾಡಿದರೆ ಇಂದಿಗೆ ದ್ವಿಗುಣವಾಗಿದೆ. ಆದರೆ ಕಮಿಷನ್ ಹೆಚ್ಚಳ ಮಾಡಿಲ್ಲ. ಕಮಿಷನ್ ಹೆಚ್ಚಳ ಮಾಡಬೇಕೆಂದು ನಮ್ಮ ಆಗ್ರಹವಾಗಿದೆ. ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕು. ಪೂರೈಕೆ ವೈಫಲ್ಯದಿಂದ ನಾವು ಸಾಕಷ್ಟು ತೊಂದರೆಗೆ ಸಿಲುಕಿದ್ದೇವೆ. ಏಕಾಏಕಿ ತೈಲ ದರ ಇಳಿಕೆಯಿಂದ ಪ್ರತಿ ವಿತರಕರಿಗೆ ಕನಿಷ್ಠ 3ರಿಂದ 30 ಲಕ್ಷ ರೂ.ಗಳವರೆಗೆ ನಷ್ಟವಾಗುತ್ತದೆ. ಇದನ್ನು ವಿರೋಸಿ ಪ್ರತಿಭಟನೆ ನಡೆಸುತ್ತಿದ್ದೇವೆ.
ತೈಲ ಬೆಲೆ ಏರುಗತಿಯಲ್ಲಿದ್ದಾಗ ಪೈಸೆ ಲೆಕ್ಕದಲ್ಲಿ ಬೆಲೆ ಏರಿಕೆ ಮಾಡಲಾಗುತ್ತದೆ. ಆದರೆ, ದರ ಇಳಿಕೆಯನ್ನು ಏಕಾಏಕಿ 9ರೂಗೆ ಇಳಿಕೆಯಾಗಿದೆ. ಹಿಂದಿನ ದಿನ ಖರೀದಿಸಿ ದಾಸ್ತಾನು ಮಾಡಿಕೊಂಡಿದ್ದ ತೈಲವನ್ನು ನಾವು ಕಡಿಮೆ ದರದಲ್ಲಿ ಮಾರಾಟ ಮಾಡಬೇಕು. ಹೀಗಾಗಿ ನಮಗೆ ಲಕ್ಷಾಂತರ ರೂ. ನಷ್ಟವಾಗುತ್ತದೆ. ಇದಲ್ಲದೆ ಬಂಕ್ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯ, ಮೂಲಭೂತ ವ್ಯವಸ್ಥೆ ಮಾಡಬೇಕು. ಪ್ರಸ್ತುತ ವ್ಯವಸ್ಥೆಯಲ್ಲಿ ಬಂಕ್ ನಡೆಸುವುದು ದುಸ್ತರವಾಗಿದೆ.
ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ.