ಮೈಸೂರು: ಜಿಲ್ಲೆಯ ಪ್ರತಿಷ್ಠಿತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ-ಕಾಲೇಜುಗಳ ಆವರಣದಲ್ಲಿ ಡ್ರಗ್ಸ್ ಸಿಗುತ್ತದೆ. ಮೈಸೂರಿನ ಪ್ರತಿಷ್ಠಿತ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಸಿಗುತ್ತೆ. ಇದು ಪೋಷಕರು, ಪಾಲಕರು, ಶಿಕ್ಷಕರಿಗೆ ಗೊತ್ತಿದೆ. ಆದ್ರೆ ಯಾರೊಬ್ಬರೂ ಮಾತನಾಡುತ್ತಿಲ್ಲ ಎಂದು ಹೇಳಿದರು.
ಹೊರ ದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಕಾಲೇಜು ಸೇರುತ್ತಾರೆ. ಈಗಲೂ ಹಾಸ್ಟೆಲ್ಗಳ ಮೇಲೆ ದಾಳಿ ಮಾಡಿ. ಹಾಸ್ಟೆಲ್ಗಳನ್ನು ಚೆಕ್ ಮಾಡಿದರೆ ಡ್ರಗ್ಸ್, ಹೆರಾಯಿನ್ ಎಲ್ಲವೂ ಸಿಗುತ್ತವೆ ಎಂದು ಸವಾಲೆಸೆದರು.
ಲವ್ ಜಿಹಾದ್ ಮಾದರಿಯಲ್ಲಿಯೇ ಡ್ರಗ್ಸ್ ಜಿಹಾದ್ ನಡೆಯುತ್ತಿದೆ. ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ. ಪಂಜಾಬ್, ಗುಜರಾತ್, ಗೋವಾ ಮೂಲಕ ಡ್ರಗ್ಸ್ ದೇಶಕ್ಕೆ ಪ್ರವೇಶಿಸುತ್ತಿದೆ. ಇದರಲ್ಲಿ ರಾಜಕಾರಣಿಗಳು ಭಾಗಿಯಾಗಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ ಎಂದರು.
ಹೊಂದಾಣಿಕೆ ರಾಜಕಾರಣದ ಮೂಲಕ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಬಗ್ಗೆ ಗಮನ ಸೆಳೆದಿದ್ದ ನನ್ನನ್ನೇ ಟಾರ್ಗೆಟ್ ಮಾಡಿದರು. ಆಗಲೇ ಇದನ್ನು ಮಟ್ಟ ಹಾಕಿದ್ದರೆ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ದೆಹಲಿ ಪೊಲೀಸರು ಬಂದು ದಾಳಿ ಮಾಡುವವರೆಗೂ ರಾಜ್ಯ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಗುಪ್ತಚರ ಇಲಾಖೆಯವರು ಕತ್ತೆ ಕಾಯುತ್ತಿದ್ರಾ ಎಂದು ಪ್ರಶ್ನಿಸುವ ಮೂಲಕ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.