ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಿಲ್ಲೆಯ ಹೊಸ ತಾಲ್ಲೂಕು ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ ತಮ್ಮ ಮೊದಲ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಿದರು.
ಹೊಸ ತಾಲ್ಲೂಕಿನ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಆಶಯದಂತೆ ಮೂರನೇ ಶನಿವಾರವಾದ ಇಂದು(ಜೂ.18) ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಆಗಮಿಸಿದರು.
ಮೊದಲ ಬಾರಿ ತಮ್ಮ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಊರ ದ್ವಾರದ ಬಳಿಯೇ ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು.
ಅಲ್ಲಿಂದ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದವರೆಗೆ ನಡೆದುಕೊಂಡ ಹೋದ ಜಿಲ್ಲಾಧಿಕಾರಿ ನಿತೇಶ ಪಾಟೀಲರು, ಮಾರ್ಗಮಧ್ಯದಲ್ಲಿ ಸರಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಸಸಿಯನ್ನು ನೆಟ್ಟರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪೋಷಣ ಅಭಿಯಾನ ಮತ್ತು ಪೌಷ್ಟಿಕ ಆಹಾರ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕೆಲ ಮಕ್ಕಳಿಗೆ ಸ್ವತಃ ಪೌಷ್ಟಿಕ ಸಿಹಿತಿನಿಸುಗಳನ್ನು ತಿನಿಸಿದರು. ಇದಲ್ಲದೇ ಆರೋಗ್ಯ ಇಲಾಖೆಯ ವತಿಯಿಂದ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳವನ್ನು ವೀಕ್ಷಿಸಿದರು. ಸುಮಾರು 120 ಜನರಿಗೆ ನೇತ್ರ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 10 ಜನರಿಗೆ ಕನ್ನಡಕವನ್ನು ಜಿಲ್ಲಾಧಿಕಾರಿಗಳು ವಿತರಿಸಿದರು.