ಕರ್ನಾಟಕದಲ್ಲಿ ಹಲವು ಮೂಲಭೂತ ಯೋಜನೆಗಳನ್ನು ಕಲ್ಪಿಸುವ ಯೋಜನೆಗಳಿಗೆ ಚಾಲನೆ ಕೊಟ್ಟಿರುವುದು ಸಂತೋಷ ತಂದಿದೆ.ನಗರದ ಅಭಿವೃದ್ಧಿಯಿಂದ ಲಕ್ಷಾಂತರ ಕನಸುಗಳ ವಿಕಾಸವಾಗಲಿದೆ. ಹಾಗಾಗಿ ಬೆಂಗಳೂರಿಗರ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧವಾಗಿದ್ಧೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೆಂಗಳೂರು: ಜಗತ್ತಿನ ಮುಂಚೂಣಿ ನಗರಗಳಲ್ಲಿ ಬೆಂಗಳೂರು ಒಂದು. ಉದ್ಯೋಗ, ನವೋದ್ಯಮಗಳನ್ನು ಸೃಷ್ಟಿಸುವ ನಗರವೂ ಆಗಿದೆ. ಈ ನಗರಿಯ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧರಾಗಿದ್ಧೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ಕನ್ನಡದಲ್ಲಿ ಮಾತು: ಕೊಮ್ಮಘಟ್ಟದಲ್ಲಿ ಉಪನಗರ ರೈಲ್ವೇ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿ ಕನ್ನಡದಲ್ಲೇ ಮೋದಿ ಮಾತು ಆರಂಭಿಸಿದರು. “ಕರುನಾಡ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು. ಬೆಂಗಳೂರಿನ ಮಹಾಜನತೆಗೆ ವಿಶೇಷ ನಮಸ್ಕಾರಗಳು. ಇಂದು ಮಹತ್ವದ ದಿನವಾಗಿದೆ. ಕರ್ನಾಟಕದಲ್ಲಿ ಹಲವು ಮೂಲಭೂತ ಯೋಜನೆಗಳನ್ನು ಕಲ್ಪಿಸುವ ಯೋಜನೆಗಳಿಗೆ ಚಾಲನೆ ಕೊಟ್ಟಿರುವುದು ನಮಗೆ ಸಂತೋಷ ತಂದಿದೆ” ಎಂದು ಹೇಳುವ ಮೂಲಕ ಕನ್ನಡಿಗರ ಮನಗೆಲ್ಲುವ ಪ್ರಯತ್ನ ಮಾಡಿದರು.
ಇಲ್ಲಿಗೆ ಬರುವ ಮೊದಲು ಐಐಎಸ್ಸಿ, ಬೇಸ್ ವಿವಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಿದ್ದರು. ಬೆಂಗಳೂರಿನಲ್ಲಿ ಇದು ಕೊನೆಯ ಕಾರ್ಯಕ್ರಮ, ಇಲ್ಲಿಂದ ಮೈಸೂರಿಗೆ ಹೋಗುತ್ತೇನೆ. ಎರಡು ದಿನಗಳ ರಾಜ್ಯ ಪ್ರವಾಸದ ವೇಳೆ 33 ಸಾವಿರ ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದು, ಮೊದಲ ದಿನವಾದ ಇಂದು 27 ಸಾವಿರ ಕೋಟಿ ವೆಚ್ಚದ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಆಗಿದೆ. ಹಲವು ಯೋಜನೆಗಳ ಮೂಲಕ ಜನರ ಸೇವೆಗೆ ಅವಕಾಶ ಸಿಕ್ಕಿದೆ. ರಾಜ್ಯದಲ್ಲಿ ಐದು ನ್ಯಾಷನಲ್ ಹೈವೇ ಯೋಜನೆಗಳು, ಏಳು ರೈಲು ಯೋಜನೆಗಳಿಗೆ ಚಾಲನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಲಕ್ಷಾಂತರ ಕನಸುಗಳ ವಿಕಾಸ: ಬೆಂಗಳೂರು ಲಕ್ಷಾಂತರ ಜನರಿಗೆ ಕನಸಿನ ನಗರಿಯಾಗಿದೆ. ಬೆಂಗಳೂರಿನ ಅಭಿವೃದ್ಧಿಯಿಂದ ಲಕ್ಷಾಂತರ ಕನಸುಗಳ ವಿಕಾಸವಾಗಲಿದೆ. ಹಾಗಾಗಿ ಕೇಂದ್ರದಿಂದ ಬೆಂಗಳೂರು ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ಕೊಡಲಾಗುತ್ತಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಇಳಿಸಲು ಹಲವು ಯೋಜನೆ ರೂಪಿಸಲಾಗಿದೆ. ಸಂಚಾರ ದಟ್ಟಣೆಯಿಂದ ಮುಕ್ತಿ ಕೊಡಲು ರೈಲು, ರಸ್ತೆ, ಮೂಲಸೌಕರ್ಯ ಹೆಚ್ಚಿಸಿದ್ದೇವೆ. ಮೂಲಸೌಕರ್ಯ ಕೊಡುವ ಕೆಲಸವನ್ನು ನಮ್ಮ ಡಬಲ್ ಇಂಜಿನ್ ಸರ್ಕಾರ ಮಾಡಿದೆ ಎಂದರು.