ಉತ್ತರಕರ್ನಾಟಕದ ಶಕ್ತಿದೇವತೆ, ಲಕ್ಷಾಂತರ ಭಕ್ತರ ಪಾಲಿನ ಆರಾಧ್ಯ ದೇವಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಸುಕ್ಷೇತ್ರದಲ್ಲಿನ ಅವ್ಯವಸ್ಥೆಯನ್ನು ಖಂಡಿಸಿ ಜೋಗತಿಯರು ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತಲೆ ಮೇಲೆ ಸವದತ್ತಿ ಯಲ್ಲಮ್ಮ ದೇವಿಯ ಮೂರ್ತಿಯನ್ನು ಹೊತ್ತುಕೊಂಡು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೋಗತಿಯರು ಯಲ್ಲಮ್ಮ ಗುಡ್ಡದಲ್ಲಿನ ಅವ್ಯವಸ್ಥೆಯ ವಿರುದ್ಧ ಅಸಮಾಧಾನ ಹೊರ ಹಾಕಿದರು. ಜಿಲ್ಲಾಡಳಿತ ಮತ್ತು ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಜೋಗತಿಯರು ನಮಗೆ ಯಾವುದೇ ಅನುಕೂಲ, ವ್ಯವಸ್ಥೆ ಇಲ್ಲ. ಪ್ರತಿಯೊಂದಕ್ಕೂ ಡಬಲ್ ರೇಟ್ ಕೊಡಬೇಕಾಗುತ್ತಿದೆ. 10-20 ಸಾವಿರ ರೂಪಾಯಿ ಖರ್ಚು ಮಾಡಿ ಹೋದ್ರೂ ನಮಗೆ ಅಲ್ಲಿ ಯಾವುದೇ ರೀತಿ ವ್ಯವಸ್ಥೆ ಸಿಗುತ್ತಿಲ್ಲ. ಅಲ್ಲಿ ನಮಗೆ ಬಾಡಿಗೆ ಮನೆ ಸಹಿತ ಸಿಗುತ್ತಿಲ್ಲ, ಹೊರಗೆ ಅಡುಗೆ ಮಾಡಿಕೊಂಡು ತಿನ್ನೋದು ಬರೋದು ಆಗುತ್ತಿದೆ. ನಿಲ್ಲೋಕೆ ಜಾಗೆ ಕೂಡ ಇಲ್ಲ. ಹೀಗಾಗಿ ನಾವು ಜಿಲ್ಲಾಧಿಕಾರಿ ಕಚೇರಿಗೆ ಜೋಗ ಹಾಕಿಕೊಂಡು ಬರಬೇಕಾಗುತ್ತದೆ ಎಂದು ಎಚ್ಚರಿಸಿದರು.