ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡುವೆ ಟ್ವೀಟ್ ವಾರ್ ಜೋರಾಗಿ ನಡೆದಿದೆ. ಏಟಿಗೆ ಪ್ರತಿಏಟು ಎಂಬಂತೆ ಇಬ್ಬರೂ ಹಿರಿಯ ಮುಖಂಡರ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳು ಈಗ ತೀಕ್ಷ್ಣ ಸ್ವರೂಪ ಪಡೆದುಕೊಂಡಿವೆ.
ಸಿದ್ದರಾಮೋತ್ಸವದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ಟ್ವಿಟರ್ನಲ್ಲಿ ಟೀಕಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ಇಂದು ತಿರುಗೇಟು ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತನಾಡಿದ್ದ ಜೋಶಿ, “ಸಿದ್ದರಾಮಯ್ಯ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮಲ್ಲಿಕಾರ್ಜುನ್ ಖರ್ಗೆ, ಡಾ.ಜಿ.ಪರಮೇಶ್ವರ್ ಅವರನ್ನು ಮುಳುಗಿಸಿದರು. ಈಗ ಡಿ.ಕೆ.ಶಿವಕುಮಾರ್ ಅವರನ್ನು ಮುಳುಗಿಸಲು ಹೊರಟಿದ್ದಾರೆ. ಅವರಂತಹ ಹಿರಿಯ ನಾಯಕರು ಕೂಡ ಸಿದ್ದರಾಮಯ್ಯನವರಿಂದ ಬೇಸತ್ತಿದ್ದಾರೆ. ಹಾಗಾದಲ್ಲಿ, ಕಾಂಗ್ರೆಸ್ ನಾಶವಾಗಿ ಬಿಜೆಪಿಗೆ ಅನುಕೂಲ ಆಗುತ್ತದೆ” ಎಂದಿದ್ದರು.