ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಹತ್ತು ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಿಜೆಪಿ ಮುಂದಾಗಿದ್ದರೆ, ಕಾಂಗ್ರೆಸ್ ಸಹ ರಾಜ್ಯದ ಗದ್ದುಗೆಗೆ ಏರಲು ತಂತ್ರಗಾರಿಕೆ ಮಾಡುತ್ತಿದೆ. ನಾವೇನು ಕಡಿಮೆ ಎಂಬಂತೆ ಜೆಡಿಎಸ್ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿದೆ.
ಆಂತರಿಕ ಕಚ್ಚಾಟ : ದಕ್ಷಿಣ ಭಾರತದ ರಾಜ್ಯಗಳ ಅಧಿಕಾರಕ್ಕಾಗಿ ದಂಡಯಾತ್ರೆ ಶುರು ಮಾಡಿರುವ ಬಿಜೆಪಿಗೆ ಕೆಲವು ಸೂಕ್ಷ್ಮ ಪರಿಸ್ಥಿತಿಗಳು ಎದುರಾಗಿವೆ. ರಾಜ್ಯದ ರಾಜಕೀಯ ಸೂಕ್ಷ್ಮ ಪರಿಸ್ಥಿತಿಯನ್ನು ತಹಬದಿಗೆ ತರಲು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಆಂತರಿಕ ಕಚ್ಚಾಟ ಮುಂದುವರಿದಿದೆ. ಈ ಸಮಯವನ್ನು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.ಹೆಚ್ಡಿಕೆ ಮಾಸ್ಟರ್ ಪ್ಲಾನ್: 2023 ರ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಜೆಡಿಎಸ್ ಹವಣಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮೂರು ಹತ್ಯೆಗಳ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೂರು ದಿನಗಳ ಹಿಂದೆ ಕರಾವಳಿ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವಧಿಪೂರ್ವ ಚುನಾವಣೆ ಭವಿಷ್ಯ ನುಡಿದಿರುವ ಹೆಚ್ಡಿಕೆ, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.