ಹೊಸದಿಲ್ಲಿ: ವಿಧಾನ ಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುವುವನ್ನು ನನ್ನ ಬಯಕೆ ಇದೆ. ವರಿಷ್ಠರ ಅನುಮತಿ ಮತ್ತು ಸಹಮತಿ ಸಿಕ್ಕಿದ ತಕ್ಷಣ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ್ದೇನೆ. ಅವರು ಪ್ರಧಾನಿ ಜೊತೆಗ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ನಿರೀಕ್ಷೆ ಇದೆ ಎಂದರು.
ಪ್ರಧಾನಿ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಿದ್ದೇನೆ.ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೆಲವು ದಿನಗಳಲ್ಲಿ ಬೇಡಿಕೆ ಈಡೇರುವ ವಿಶ್ವಾಸವಿದೆ. ದೆಹಲಿ ಭೇಟಿ ಯಶಸ್ವಿಯಾಗಿದೆ ಎಂದು ಹೇಳಿದರು.