ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರವಾಗಿ ಮತ್ತೆ ವದಂತಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾಲೆಳೆದಿದೆ.
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಸಿಎಂ ಬೊಮ್ಮಾಯಿ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಲೇವಡಿ ಮಾಡಿದೆ.
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಪೊಪೆಟ್ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ರಾಜ್ಯ ಬಿಜೆಪಿ ಸಂಪ್ರದಾಯಕ್ಕೋ? ಎಂದು ವ್ಯಂಗ್ಯವಾಡಿದೆ.
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ. ಈ ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ BJPvsBJP ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಸರಣಿ ಟ್ವೀಟ್ ಮೂಲಕ ಕೇಳಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ ಎಂದು ಕಿಡಿಕಾರಿದೆ.