ಬೆಂಗಳೂರು,ಸೆ.7-ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ತೆರವಾಗಿರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ತೆರವಾಗಿರುವ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಕ್ಷೇತ್ರಗಳಿಗೆ ನಿಯಮಾವಳಿ ಪ್ರಕಾರ ಆರು ತಿಂಗಳೊಳಗೆ ಮರು ಚುನಾವಣೆ ನಡೆಯಬೇಕು.
ಆದರೆ ಕರ್ನಾಟಕದ ವಿಧಾನಸಭೆ ಚುನಾವಣೆ 2023ರ ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳು ಇಲ್ಲ ಎನ್ನಲಾಗುತ್ತಿದೆ.
ಏಕೆಂದರೆ ನವೆಂಬರ್ ತಿಂಗಳಿನಿಂದಲೇ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಆರಂಭವಾಗುತ್ತದೆ. ಮತದಾರರ ಪಟ್ಟಿ ಸಿದ್ದಪಡಿಸುವುದು, ನಂತರ ಅಂತಿಮ ಪಟ್ಟಿ ಪ್ರಕಟ ಹೀಗೆ ಹಲವಾರು ಪ್ರಕ್ರಿಯೆಗಳು ಪ್ರಾರಂಭವಾಗುವುದರಿಂದ ಹುಕ್ಕೇರಿಗೆ ಉಪಚುನಾವಣೆ ನಡೆಯುವ ಸಾಧ್ಯತೆಗಳು ಕಡಿಮೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಹಾಲಿ ಸರ್ಕಾರ ಅವಧಿಗೂ ಮುನ್ನ ವಿಧಾನಸಭೆಯನ್ನು ವಿಸರ್ಜಿಸಿ ವಿಧಾನಸಭೆ ಚುನಾವಣೆಗೆ ಹೋಗುವ ಆಲೋಚನೆಯಲ್ಲಿದ್ದರೆ ಏಕಕಾಲಕ್ಕೆ ಚುನಾವಣೆ ನಡೆಯಲಿದೆ.