ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆಲಮೇಲ ತಾಲೂಕಿನ ಬಗಲೂರು ಬಳಿ ಭೀಮಾ ನದಿಯ ಸೇತುವೆ ಮುಳುಗಡೆಯಾಗಿದ್ದು, ಗ್ರಾಮದ ಸಂಪರ್ಕ ಕಡಿತವಾಗಿದೆ. ನಗರದಲ್ಲಿ ಹಲವು ಕಡೆಗಳಲ್ಲಿ ಜನವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ನಷ್ಟ ಸಂಭವಿಸಿದೆ.
ಭೀಮಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ, ವಿವಿಧ ಜಲಾಶಯ, ಬಾಂದಾರುಗಳಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು ಹೊರ ಬಿಡಲಾಗಿದೆ. ಪರಿಣಾಮ ಆಲಮೇಲ ತಾಲೂಕಿನ ಬಗಲೂರ ಗ್ರಾಮದ ಸೇತುವೆ ಮುಳುಗಡೆ ಆಗಿದ್ದು, ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ನದಿಯಲ್ಲಿ ಪ್ರವಾಹ ಗಂಭೀರವಾಗಿರುವ ಕಾರಣ ಸಾರ್ವಜನಿಕರು ನದಿ ತೀರಕ್ಕೆ ಹೋಗದಂತೆ ತಾಲೂಕು ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಮತ್ತೊಂದೆಡೆ ನಾಲ್ಕಾರು ಗಂಟೆ ಸುರಿದ ಮಳೆಗೆ ವಿಜಯಪುರ ನಗರವೂ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯಿಂದ ರೈತರ ಬೆಳೆ, ವ್ಯಾಪಾರ, ವಾಣಿಜ್ಯ ಪ್ರದೇಶಗಳ ಹಾನಿ ಸಂಭವಿಸಿದ್ದು, ಜಿಲ್ಲಾಡಳಿತ ಹಾನಿಯ ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆ.
ಮಳೆ ನೀರಿನಿಂದ ನಗರದ ತಗ್ಗು ಪ್ರದೇಶಗಳ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದ ವಿಷಯ ತಿಳಿಯುತ್ತಲೇ ವಿಜಯಪುರ ಉಪ ವಿಭಾಗಾಧಿಕಾರಿ ನಗರದ ಶಾಪೇಟೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.