ಬೆಂಗಳೂರು,ಸೆ.15-ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಯಾರ್ಯಾರು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇದೇ ಅಧಿವೇಶನದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪು ಮಾಡಿದ್ದಾರೆಯೇ , ಇಲ್ಲ ನಾನು ತಪ್ಪು ಮಾಡಿದ್ದೇನೆಯೇ ಅಥವಾ ನಮ್ಮ ಸಂಪುಟ ಸಹೋದ್ಯೋಗಿಗಳು ಮಾಡಿದ್ದಾರೆಯೇ ಎಂಬುದರ ಕುರಿತು ಯಾರ್ಯಾರು ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೋ
ಅವರೆಲ್ಲರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕಲೆಹಾಕಿ ದಾಖಲೆಗಳನ್ನು ಸಿದ್ದಪಡಿಸುವಂತೆ ಸೂಚಿಸಿದ್ದೇನೆ. ಅಧಿಕಾರಿಗಳು ಕೂಡ ಅಗತ್ಯವಿರುವ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಕೆರೆಗಳನ್ನು ನುಂಗಿದ ಮೂಲ ಪುರುಷರು ಯಾರು, ಯಾವ ಯಾವ ಸರ್ಕಾರದಲ್ಲಿ ಎಷ್ಟೆಷ್ಟು ಒತ್ತುವರಿಯಾಗಿದೆ ಎಲ್ಲವನ್ನು ಬಹಿರಂಗಪಡಿಸುತ್ತೇವೆ ಎಂದು ಹೇಳಿದರು.