ಬೆಂಗಳೂರು: ವಿಧಾನ ಪರಿಷತ್ (Vidhana Parishad) ಕಲಾಪದ (Session) ಕೊನೆ ದಿನವೂ ಗದ್ದಲ ಗಲಾಟೆಗೆ ಕಾರಣವಾಯ್ತು. 40% ಸರ್ಕಾರ, ವಕ್ಫ್ ಆಸ್ತಿ (Wakf Property) , BMS ಟ್ರಸ್ಟ್ ಹಗರಣದ ಗಲಾಟೆ ಸದನದಲ್ಲಿ ಸದ್ದು ಮಾಡಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸಭಾಪತಿಗಳು ಮುಂದೂಡಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು ಮಾಣಿಪ್ಪಾಡಿ ವರದಿ ಕುರಿತು ನಿಯಮ 59ರ ಅಡಿ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿದರು. ಚರ್ಚೆಗೆ ಅವಕಾಶ ಕಲ್ಪಿಸಲು ಆಗ್ರಹಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.
ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ, ಕಾಂಗ್ರೆಸ್ ನಿಲುವಳಿ ಸೂಚನೆ ಪರಿಶೀಲಿಸಿದ್ದೇನೆ. ಮಾಣಪ್ಪಾಡಿ ವರದಿ ಸ್ಥಾಯಿ ಸಮಿತಿ ನೀಡಿದ ವರದಿಯಲ್ಲ. ಅಲ್ಪಸಂಖ್ಯಾತ ಆಯೋಗದ ಕಾಯ್ದೆಯಂತೆ ಮಂಡಿಸಿದ್ದಾರೆ. ಇದು ಇತ್ತೀಚೆಗೆ ನಡೆದ ಘಟನೆಯಲ್ಲ. ಹಾಗಾಗಿ ನಿಯಮ 59ರ ನಿಲುವಳಿ ಸೂಚನೆ ತಿರಸ್ಕಾರ ಮಾಡುತ್ತೇನೆ ಎಂದು ರೂಲಿಂಗ್ ನೀಡಿದರು. ವರದಿಯನ್ನು ಸದಸ್ಯರಿಗೆ ನೀಡುವಂತೆ ಸೂಚಿಸಿದರು. ಸಭಾಪತಿಗಳ ನಿರ್ಧಾರಕ್ಕೆ ಕಾಂಗ್ರೆಸ್ ಸದಸ್ಯರು ಅಸಮಧಾನ ವ್ಯಕ್ತಪಡಿಸಿದರು.