ಬೆಂಗಳೂರು, ಸೆ.28. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ.
ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ.
ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ ಆದೇಶವನ್ನು ನೀಡಿದೆ.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ವಾದವೇನು?
ಅರ್ಜಿದಾರರ ಪರ ವಾದಿಸಿದ ವಕೀಲರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ಸಹ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.