ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್ ಖಾತೆಗಳ ಚೆಕ್ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿ ಇತ್ಯರ್ಥಪಡಿಸಿದೆ.
ಮಠದ ವಿದ್ಯಾಪೀಠ ಸಂಸ್ಥೆಗಳ ಉದ್ಯೋಗಿ ಹಾಗೂ ಸಿಬ್ಬಂದಿಗೆ ವೇತನ ನೀಡುವುದಕ್ಕಾಗಿ ಅ. 3, 6 ಮತ್ತು 10ರಂದು ಮಾತ್ರ ಚೆಕ್ಗಳಿಗೆ ಸಹಿ ಹಾಕಬಹುದು. ಸಹಿ ಪಡೆಯುವ ವ್ಯಕ್ತಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಈ ಪ್ರಕ್ರಿಯೆ ವೇಳೆ ತನಿಖಾಧಿಕಾರಿ ಹಾಗೂ ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಲ್ಲದೇ, ಸಹಿ ಮಾಡಿದ ಚೆಕ್ಗಳ ನಕಲು (ಜೆರಾಕ್ಸ್) ಪ್ರತಿಗಳನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.