ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದನ್ನು ಪ್ರಶ್ನಿಸಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ಸಾಕ್ಷ್ಯರಹಿತ ಆರೋಪದಲ್ಲಿ ಬಿಹಾರ ಮೂಲದ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಬಿಹಾರ ರಾಜ್ಯದ ಪಾಟ್ನಾ ಮೂಲದ ಪ್ರಿಯಾಂಶು ಕುಮಾರ್ ಮತ್ತು ಅಲೋಕ್ ಕುಮಾರ್ ಎಂಬುವರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠ, ತನಿಖಾಧಿಕಾರಿಗಳು ಅರ್ಜಿದಾರರ ಆರೋಪ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ ಆರೋಪ ಸತ್ಯ ಎಂದು ತಿಳಿಯಲು ಸಾಧ್ಯವಿಲ್ಲ ಎಂಬುದಾಗಿ ಅಭಿಪ್ರಾಯಪಟ್ಟಿದೆ.
ಅಲ್ಲದೆ, ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಗಳಲ್ಲಿ ನ್ಯಾಯಾಲಯದಲ್ಲಿ ಮಾತ್ರ ದಂಡ ಪಾವತಿಸಬೇಕು ಎಂಬುದಾಗಿ ಸಂಚಾರಿ ಪೊಲೀಸ್ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಉಲ್ಲಂಘಿಸಿ ತನಿಖಾಧಿಕಾರಿಗಳು ಅರ್ಜಿದಾರರಿಂದ ದಂಡ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಇದು ನಿಯಮ ಬಾಹಿರ ಎಂದು ಕೋರ್ಟ್ ಹೇಳಿದೆ.