ಗದಗ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ. ತಿಮ್ಮಣ್ಣ (50) ಮೃತರು.
ಸತತವಾಗಿ ಸುರಿದಿದ್ದ ಮಳೆಗೆ ಮನೆ ಗೋಡೆ ಸಂಪೂರ್ಣವಾಗಿ ಶಿಥಿಲಗೊಂಡಿತ್ತು. ಮನೆಯಲ್ಲಿ ಮಲಗಿದ್ದಾಗ ಏಕಾಏಕಿ ಗೋಡೆ ಕುಸಿದು ಮೈಮೇಲೆ ಬಿದ್ದಿದೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿ ಮಣ್ಣಿನ ಅಡಿ ಸಿಲುಕಿದ್ದ ತಿಮ್ಮಣ್ಣ ಅವರ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ತಿಮ್ಮಣ್ಣ ಅಲಿಯಾಸ್ ಅಪ್ಪಣ್ಣ ಕಳ್ಳಿಮನಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಗದಗ ತಹಶೀಲ್ದಾರ್ ಕಿಶನ್ ಕಲಾಲ್ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.