ಕಾಂಗ್ರೆಸ್ನ ರಾಹುಲ್ ಗಾಂಧಿ ತಮ್ಮ ಆಸ್ತಿತ್ವಕ್ಕಾಗಿ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಬಗ್ಗೆ ಲೇವಡಿ ಮಾಡಿದ್ದಾರೆ.
ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಗ್ರಾಮದಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ರಾಹುಲ್ ಗಾಂಧಿ ಅವರಿಗೆ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೀಗಾಗಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯಿಂದ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಗೂ, ಜೋಡೋ ಯಾತ್ರೆಗೂ ಸಂಬಂಧವಿಲ್ಲ. ಅವರು ಏನು ಮಾಡುತ್ತಿದ್ದಾರೆ ನಮ್ಮಗೆ ಗೊತ್ತಿಲ್ಲ. ನಾವು ನೇರವಾಗಿ ಜನರ ಬಳಿ ಹೋಗುತ್ತಿದ್ದೇವೆ ಎಂದರು.
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಜನಸಂಕಲ್ಪ ಯಾತ್ರೆ ಇಂದಿನಿಂದ ಆರಂಭಿಸಲಾಗುತ್ತಿದ್ದು, 50ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಯಾತ್ರೆ ಮಾಡಲಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಿಳಿಸುತ್ತೇವೆ. ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಇಟ್ಟು ಜನಾದೇಶವನ್ನು ಪಡೆಯುತ್ತೇವೆ. ಅಲ್ಲದೇ ಬಿಜೆಪಿ ಮತ್ತೆ ರಾಜ್ಯ ಅಧಿಕಾರ ಚುಕ್ಕಾಣಿ ಹಿಡಿಯುತ್ತದೆ ಎಂದು ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವುದು ಹಲವು ವರ್ಷಗಳಿಂದ ಬೇಡಿಕೆ ಇತ್ತು. ಇದನ್ನು ಎಲ್ಲರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕ ದಿಟ್ಟ ಕ್ರಮ ತೆಗೆದುಕೊಂಡಿದ್ದೇನೆ. ಆದರೆ, ನಮ್ಮ ಸಂಭ್ರಮಕ್ಕೆ ಪಕ್ಕದ ಮನೆಯವರು ದೂದ್ ಪೇಡಾ ಹಂಚಿದ ಹಾಗೆ ಕಾಂಗ್ರೆಸ್ನಿಂದ ಆಗುತ್ತಿದೆ. ಕಾಂಗ್ರೆಸ್ ಏನು ಮಾಡಿಲ್ಲ. ಸರ್ಕಾರ ಸಮುದಾಯಗಳ ಬೇಡಿಕೆ ಅನುಸಾರವಾಗಿ ಮೀಸಲಾತಿ ಹೆಚ್ಚಳದ ದಿಟ್ಟ ಹೆಜ್ಜೆಯನ್ನು ಇರಿಸಿದೆ.ಇದರ ಬಗ್ಗೆ ಯಾರು ಸಹ ಅಪಸ್ವರ ಎತ್ತಬಾರದು ಹಾಗೂ ಮಾತನಾಡಬಾರದು. ಆ ಜನಾಂಗ ನೊಂದಿದೆ. ಅವರಿಗೆ ಅಧಿಕಾರ ಸಿಕ್ಕಿಲ್ಲ. ಹೀಗಾಗಿ ಅವರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಅಲ್ಲದೇ ಅಪಸ್ವರ ಎತ್ತಿದವರು ಎಸ್ಸಿ, ಎಸ್ಟಿ ಸಮುದಾಯದ ವಿರೋಧಿಗಳು ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ಕಿಡಿಕಾರಿದರು.