ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷದ ಶಾಸಕರಿಗೆ ಬಿಜೆಪಿಗೆ ಸೇರುವಂತೆ ಹಣದ ಆಮಿಷವೊಡ್ಡಿದ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.
ತೆಲಂಗಾಣ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ ಈ ಸಮನ್ಸ್ ಜಾರಿ ಮಾಡಿದೆ.
ಶಾಸಕರಿಗೆ ಹಣದ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ. 21ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿ.ಎಲ್.ಸಂತೋಷ್ಗೆ ಸಮನ್ಸ್ ಜಾರಿಗೊಳಿಸಿರುವ ಎಸ್ಐಟಿ, ತಪ್ಪಿದರೆ ಬಂಧನದ ಎಚ್ಚರಿಕೆಯನ್ನೂ ಕೊಟ್ಟಿದೆ.
ತೆಲಂಗಾಣದ ಸೈಬರಾಬಾದ್ ಪೊಲೀಸರು ಅ.26ರಂದು ಅಜೀಜ್ನಗರದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದಾಗ 15 ಕೋಟಿ ರೂ. ಹಣ ಪತ್ತೆಯಾಗಿತ್ತು. ಅದನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಲಾಗಿತ್ತು. ಟಿಆರ್ಎಸ್ನ ನಾಲ್ವರು ಶಾಸಕರ ಖರೀದಿಗೆ ಈ ಹಣ ತರಲಾಗಿತ್ತು ಎಂಬ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದೇ ಪ್ರಕರಣ ಸಂಬಂಧ ಈಗ ಸಮನ್ಸ್ ಜಾರಿ ಮಾಡಲಾಗಿದೆ.