ನವದೆಹಲಿ: ‘ಪಂಚಮಸಾಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಹೀಗೆ ವಿವಿಧ ಸಮುದಾಯದವರ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು’ ಎಂದು ಕಾಂಗ್ರೆಸ್ ವರಿಷ್ಠರು ಕರ್ನಾಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ.
ಭ್ರಷ್ಟಾಚಾರ, ಶೇ 40 ಕಮಿಷನ್ ಆರೋಪ, ನೇಮಕಾತಿ ಹಗರಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ದುರಾಡಳಿತ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು
ಕೊಂಡು ರಾಜ್ಯ ನಾಯಕರು ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಇದನ್ನು ಮುಂದುವರಿಸುವಂತೆ ವರಿಷ್ಠರು ತಾಕೀತು ಮಾಡಿದ್ದಾರೆ.
‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ನಿರ್ಣಯ ಕೈಗೊಳ್ಳಲಾಗಿತ್ತು. ನಂತರದ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲು ಎದುರಾಗಿತ್ತು. ಈ ಬಾರಿ ಅಂತಹ ತಪ್ಪಿಗೆ ಅವಕಾಶ ನೀಡದಂತೆ ಎಚ್ಚರವಹಿಸಬೇಕಿದೆ’ ಎಂದು ತಿಳಿಸಿದ್ದಾರೆ.