ಮೂರನೇ ವಿಶ್ವ ಕನ್ನಡ ಸಮ್ಮೇಳನವನ್ನು ಬೆಳಗಾವಿಯಲ್ಲಿಯೇ ನಡೆಸಲು ಚಳಿಗಾಲ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳುವಂತೆ ಕರ್ನಾಟಕ ಯುವ ವೇದಿಕೆ ಸಂಘಟನೆ ಒತ್ತಾಯಿಸಿದೆ.
ಸೋಮವಾರ ನಗರದ ರಾಣಿ ಚನ್ನಮ್ಮ ವೃತ್ತದ ಮುಂಭಾಗದಲ್ಲಿ ಧರಣಿ ನಡೆಸಿದ ಕರ್ನಾಟಕ ಯುವ ವೇದಿಕೆ ಪದಾಧಿಕಾರಿಗಳು ಬೆಳಗಾವಿಯಲ್ಲಿಯೇ ಮೂರನೇ ವಿಶ್ವ ಕನ್ನಡ ಸಮ್ಮೇಳನ ನಡೆಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು. ಬಳಿಕ ಡಿಸಿ ಕಚೇರಿವರೆಗೂ ರ್ಯಾಲಿ ನಡೆಸಿದ ಕನ್ನಡ ಹೋರಾಟಗಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕರ್ನಾಟಕ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಸೋಬಾನದವರ ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಎಂಇಎಸ್ ಪುಂಡಾಟಿಕೆ ಜಾಸ್ತಿಯಾಗುತ್ತಿದೆ. ಹೀಗಾಗಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜನೆ ಮಾಡಬೇಕು.
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ 2011ರಲ್ಲಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗಿತ್ತು. ಈಗ ಮತ್ತೆ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಆದ್ದರಿಂದ ಮೂರನೇ ವಿಶ್ವ ಕನ್ನಡ ಸಮ್ಮೇಳನ ಬೆಳಗಾವಿಯಲ್ಲಿಯೇ ನಡೆಸುವ ಬಗ್ಗೆ ಡಿಸೆಂಬರ್ ನಲ್ಲಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.