ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ.
ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ. ರೌಡಿಗಳು ಅಥವಾ ಅಪರಾಧ ಹಿನ್ನೆಲೆ ಉಳ್ಳವರಿಗೆ ಸೇರಲು ಪಕ್ಷ ಯಾವುದೇ ಕಾರಣಕ್ಕೂ ಅವಕಾಶ ನೀಡದು. ಈ ವಿಷಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಪಕ್ಷದ ನಿಲುವೇನೆಂದು ಸ್ಪಷ್ಟಪಡಿಸಿದ್ದಾರೆ ಎಂದರು.
ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಅರುಣ್ ಸಿಂಗ್ ವಿಶ್ವಾಸ
ಜನಸಂಕಲ್ಪ ಸಮಾವೇಶ, ಎಸ್ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ರಾಜ್ಯದಲ್ಲಿ ಬಿಜೆಪಿ ಪರ ಒಲವಿನ ಸಂಕೇತವಾಗಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.