ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ ಅನುದಾನದ ಕಾಮಗಾರಿಗಳನ್ನು ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ಅವ್ಯವಹಾರವಾಗದಂತೆ ತಾಲೂಕು ಪಂಚಾಯತ್ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಅಮೃತ ಗ್ರಾಮ ಪಂಚಾಯಿತಿಗಳ ಮೊದಲ ಹಂತದ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯಕ್ಕೆ ಹಾಗೂ ಎರಡನೇ ಹಂತದ ಕಾಮಗಾರಿಗಳನ್ನು ಮುಂಬರುವ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಅಮೃತ್ ಸರೋವರ ಕಾಮಗಾರಿಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಮೊದಲು ಗ್ರಂಥಾಲಯ ಸ್ಥಾಪಿಸಬೇಕು. ನಂತರದ ದಿನಗಳಲ್ಲಿ ಇದನ್ನು ಡಿಜಿಟಲ್ ಗ್ರಂಥಾಲಯವಾಗಿ ಪರಿವರ್ತಿಸಬೇಕು ಎಂದರು.
ಜಿಲ್ಲೆಯ ಆರೋಗ್ಯ ಸೌಲಭ್ಯಗಳು ಮತ್ತು 23 ತಜ್ಞ ವೈದ್ಯರ ಕೊರತೆಯ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ತಜ್ಞ ವೈದ್ಯರ ಕೊರತೆಯನ್ನು ನೀಗಿಸಲಾಗುವುದು. ಕೇರಳ ರಾಜ್ಯದ ಮಾದರಿಯಲ್ಲಿ ಶಿಶುಮರಣ ಹಾಗೂ 1 ರಿಂದ 5 ವಯಸ್ಸಿನ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸುವಂತೆ ಸೂಚಿಸಿದರು.