ಬೆಳಗಾವಿ: ‘ಚಿಕ್ಕೋಡಿಯ ಸಿಎಲ್ಇ ಸಂಸ್ಥೆಯಲ್ಲಿ ಡಿ.21, 22ರಂದು ಜಿಲ್ಲಾಮಟ್ಟದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.
ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’21ರಂದು ಬೆಳಿಗ್ಗೆ 11ಕ್ಕೆ ಕ.ಸಾ.ಪ ಅಧ್ಯಕ್ಷ ಡಾ.ಮಹೇಶ ಜೋಶಿ ಸಮ್ಮೇಳನ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ಕನ್ನಡ ಚಿಂತನೆ ಗೋಷ್ಠಿ, ಸಂಜೆ 4ಕ್ಕೆ ಕೃಷಿ ಚಿಂತನೆ ಗೋಷ್ಠಿ, ಸಂಜೆ 6ಕ್ಕೆ ಸಾಂಸ್ಕೃತಿಕ ಸಂಭ್ರಮ, 22ರಂದು ಬೆಳಿಗ್ಗೆ 9ಕ್ಕೆ ಕವಿಗೋಷ್ಠಿ, ಮಧ್ಯಾಹ್ನ 12ಕ್ಕೆ ಮಹಿಳಾ ಗೋಷ್ಠಿ, 2ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಸಂಜೆ 5ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.
‘ಜಿಲ್ಲೆಯಲ್ಲಿ ನಡೆಯುವ ಮರಾಠಿ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತ್ಯ ಕ್ಷೇತ್ರದ ಬಲವರ್ಧನೆಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳಬೇಕು. ಗಡಿ ವಿಚಾರ ಕೆದಕಿ ಗೊಂದಲ ಸೃಷ್ಟಿಸಬಾರದು. ಈ ಬಗ್ಗೆ ಸಾಹಿತಿಗಳ ಗಮನಕ್ಕೆ ತರುತ್ತೇನೆ’ ಎಂದರು.
‘ಗಡಿ ವಿಚಾರವಾಗಿ ಜಿಲ್ಲೆಯ ಪ್ರತಿನಿಧಿಗಳು ಮೌನ ವಹಿಸಿರುವುದು ಸರಿಯಲ್ಲ. ಮಹಾರಾಷ್ಟ್ರಕ್ಕೆ ಪ್ರತ್ಯುತ್ತರ ನೀಡಲು ಜನಪ್ರತಿನಿಧಿಗಳು ಹಾಗೂ ಕನ್ನಡ ಮನಸ್ಸುಗಳೆಲ್ಲ ಒಗ್ಗಟ್ಟಾಗಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕ.ಸಾ.ಪ ಚಿಕ್ಕೋಡಿ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಸುರೇಶ ಉಕ್ಕಲಿ, ಬೆಳಗಾವಿ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ಹಂಜಿ, ಎಂ.ವೈ.ಮೆಣಸಿನಕಾಯಿ ಇದ್ದರು.