ಗದಗ, ಡಿಸೆಂಬರ್, 19: ಅತಿಥಿ ಶಿಕ್ಷಕನೊಬ್ಬ 10 ವರ್ಷದ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ.
ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಭರತ್ ಕೊನೆಯುಸಿರೆಳೆದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅತಿಥಿ ಶಿಕ್ಷಕನಿಂದ ಹಲ್ಲೆ, ವಿದ್ಯಾರ್ಥಿ ಸಾವು
ಅಲ್ಲದೇ ಅತಿಥಿ ಶಿಕ್ಷಕ ಮುತ್ತಪ್ಪ ವಿದ್ಯಾರ್ಥಿ ಭರತ್ ಹಾಗೂ ಅತಿಥಿ ಸಹ ಶಿಕ್ಷಕಿ ಗೀತಾ ಬಾರಕೇರಿ ಮೇಲೂ ಹಲ್ಲೆ ನಡೆಸಿದ್ದಾನೆ. ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಶಿಕ್ಷಕನ ಹುಚ್ಚಾಟಕ್ಕೆ ಇದೀಗ ವಿದ್ಯಾರ್ಥಿಯ ಜೀವವೇ ಹೋಗಿದೆ. ಇನ್ನು ಮಗ ಭರತ್ನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಶಿಕ್ಷಕನ ಹಲ್ಲೆಗೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಈ ಘಟನೆ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಅತಿಥಿ ಶಿಕ್ಷಕನ ಹುಚ್ಚಾಟ ಕಂಡು ಇನ್ನುಳಿದ ವಿದ್ಯಾರ್ಥಿಗಳು ಕೂಡ ಆತಂಕಕ್ಕೆ ಒಳಗಾಗಿದ್ದಾರೆ.
Laxmi News 24×7