ಬೆಳಗಾವಿ: ಸಮಾಜ ಕಲ್ಯಾಣ, ಹಿಂದುಳಿದ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ ವಸತಿ ಶಾಲೆಗಳ ವಿದ್ಯಾರ್ಥಿನಿಯರಿಂದ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕರಾಟೆ ಪ್ರದರ್ಶನ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸ್ಗಳನ್ನು ಕಲಿಸುವ ಅವಶ್ಯಕತೆ ಇದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಹಂತದಿಂದ ತರಬೇತಿ ನೀಡುವುದು ಸೂಕ್ತ ಎಂದರು.
ಆತ್ಮರಕ್ಷಣಾ ಕಲೆ ಕಲಿತವರು ಇತರ ಹೆಣ್ಣುಮಕ್ಕಳಿಗೆ ಈ ತರಬೇತಿ ನೀಡಬೇಕು. ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಈ ವಿದ್ಯೆ ಕಲಿಸಿದರೆ ದೊಡ್ಡ ಪ್ರಮಾಣದಲ್ಲಿ ಇದನ್ನು ವಿಸ್ತರಿಸಬಹುದು.
ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ ಸುರಕ್ಷಿತ ಸಮಾಜ ನಿರ್ಮಾಣವಾಗಲು ಸಾಧ್ಯ. ಸರ್ಕಾರ ಈ ಕಾರ್ಯಕ್ರಮ ವಿಸ್ತರಿಸಿ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದೆ. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಲ್ಲಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಾ ಬರುತ್ತಿದ್ದಾರೆ.