ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಹೈಕಮಾಂಡ್ ಜೊತೆ ವಿಸ್ತೃತ ಚರ್ಚೆ ನಡೆದಿದ್ದು, ಕಳೆದ ಬಾರಿಗಿಂತ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ. ಸಂಪುಟ ವಿಸ್ತರಣೆ ವಿಷಯ ಅಂತಿಮ ಹಂತಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಒಂದು ಪ್ರಕ್ರಿಯೆ, ಇದೀಗ ಈ ವಿಷಯದಲ್ಲಿ ಕಳೆದ ಬಾರಿಗಿಂತ ಎರಡು ಹೆಜ್ಜೆ ಮುಂದೆ ಹೋಗಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷ ಎಲ್ಲ ಆಯಾಮಗಳನ್ನು ಗಮನದಲ್ಲಿರಿಸಿಕೊಂಡು ಹೈಕಮಾಂಡ್ ನಾಯಕರು ನಮಗೆ ಮಾರ್ಗದರ್ಶನ ಮಾಡಲಿದ್ದಾರೆ. ಈಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಅಂತಿಮ ಘಟ್ಟಕ್ಕೆ ಬಂದಿದ್ದೇವೆ. ಯಾವಾಗ ಆಗಲಿದ್ಯೋ ನಿಮಗೆ ತಿಳಿಸುತ್ತೇನೆ ಎಂದರು.
ಜನವರಿಯಿಂದ ನಮ್ಮ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಹಲವಾರು ನಾಯಕರ ಪ್ರವಾಸ ಆರಂಭವಾಗಲಿದೆ. ಅದರ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ, ಚುನಾವಣಾ ಸಿದ್ಧತೆ ಕುರಿತೂ ಚರ್ಚೆ ಆಗಿದೆ. ಕೆಲವರು ಪಕ್ಷಕ್ಕೆ ಬರುವ ಬಗ್ಗೆಯೂ ಚರ್ಚೆ ನಡೆದಿದೆ ಅವರ ಬಗ್ಗೆ ವಿವರ ನೀಡಿದ್ದೇನೆ. ಕೆಲವರ ಬಳಿ ಅವರೇ ನೇರವಾಗಿ ಮಾತನಾಡಲಿದ್ದಾರೆ ಎಂದರು.
ಡಿಸೆಂಬರ್ 30ಕ್ಕೆ ರಾಜ್ಯಕ್ಕೆ ಅಮಿತ್ ಶಾ: ಡಿ.30 ಅಮಿತ್ ಶಾ ರಾಜ್ಯಕ್ಕೆ ಬರಲು ತೀರ್ಮಾನಿಸಿದ್ದಾರೆ. ಮಂಡ್ಯದಲ್ಲಿ ಅವರ ಕಾರ್ಯಕ್ರಮ ಇದೆ. ಬೆಂಗಳೂರಿನಲ್ಲಿಯೂ ಒಂದು ಕಾರ್ಯಕ್ರಮ ಇದೆ. ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ವಾಪಸ್ ಆಗಲಿದ್ದಾರೆ ಎಂದರು.
ಸರ್ವ ಪಕ್ಷ ಸಭೆ ನಂತರ ಮೀಸಲಾತಿ ತೀರ್ಮಾನಮೀಸಲಾತಿ ಬಗ್ಗೆಯೂ ಚರ್ಚೆ: ಪಂಚಮಸಾಲಿ ಮೀಸಲಾತಿ ಹೋರಾಟ ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿದ್ದು, ಮೀಸಲಾತಿ ವಿಷಯ ಜಟಿಲವಾದ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿ ಸಲಹೆ ಪಡೆದುಕೊಂಡಿದ್ದಾರೆ. ಸರ್ವಪಕ್ಷ ಸಭೆ ನಂತರ ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿಲುವು ಪ್ರಕಟಿಸುವುದಾಗಿ ತಿಳಿಸಿದ್ದಾರೆ.