Breaking News
Home / Uncategorized / ಕಳಸಾ ತಿರುವು: ಅರಣ್ಯ ಇಲಾಖೆ ಒಪ್ಪಿಗೆ

ಕಳಸಾ ತಿರುವು: ಅರಣ್ಯ ಇಲಾಖೆ ಒಪ್ಪಿಗೆ

Spread the love

ನವದೆಹಲಿ : ಮಹದಾಯಿ ಯೋಜನೆಯ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್‌ ಮೀಸಲು ಅರಣ್ಯವನ್ನು ಬಳಸಿಕೊಳ್ಳಲು ಕರ್ನಾಟಕ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.

 

ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್‌ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಕಳಸಾ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಏಳು ಗ್ರಾಮಗಳ ಅರಣ್ಯ ಬಳಕೆಗೆ (ಜಾಕ್‌ವೆಲ್‌ ನಿರ್ಮಾಣ, ಪಂಪ್‌ ಹೌಸ್‌, ಎಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌, ಪೈಪ್‌ಲೈನ್‌ಗೆ) ಒಪ್ಪಿಗೆ ನೀಡುವಂತೆ ಕರ್ನಾಟಕ ನೀರಾವರಿ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. 

ಬೆಳಗಾವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌) ಅವರು ಅಕ್ಟೋಬರ್‌ 19, ಡಿಸೆಂಬರ್‌ 15 ಹಾಗೂ 20ರಂದು ಸ್ಥಳ ಪರಿಶೀಲನೆ ನಡೆಸಿ ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್‌) ಅವರಿಗೆ ಹಲವು ಶಿಫಾರಸುಗಳು ಹಾಗೂ ಷರತ್ತುಗಳನ್ನು ಒಳಗೊಂಡ ವರದಿ ಸಲ್ಲಿಸಿದ್ದರು. ಬಳಿಕ ಸಿಸಿಎಫ್ ಅವರು ಅರಣ್ಯ ಪಡೆಯ ಮುಖ್ಯಸ್ಥ ರಾಜ್‌ ಕಿಶೋರ್ ಸಿಂಗ್ ಅವರಿಗೆ ವರದಿ ನೀಡಿದ್ದರು. ಈ ವರದಿಯ ಆಧಾರದಲ್ಲಿ ರಾಜ್‌ ಕಿಶೋರ್ ಸಿಂಗ್ ಅವರು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್ ಅವರಿಗೆ ಶುಕ್ರವಾರ ವರದಿ ಸಲ್ಲಿಸಿದ್ದಾರೆ.

ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಸೆಕ್ಷನ್‌ 2 ಅಡಿಯಲ್ಲಿ
ಈ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಪರಿಸರ ಸಚಿವಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಉಪ ಮಹಾನಿರ್ದೇಶಕರಿಗೆ (ಕೇಂದ್ರ) ಶುಕ್ರವಾರವೇ ಪ್ರಸ್ತಾವನೆ
ಸಲ್ಲಿಸಿದ್ದಾರೆ.

40 ಹೆಕ್ಟೇರ್‌ಗಿಂತ ಕಡಿಮೆ ಅರಣ್ಯ ಭೂಮಿ ಸ್ವಾಧೀನಕ್ಕೆ ಕೇಂದ್ರ ಪರಿಸರ ಸಚಿವಾಲಯದ ಬೆಂಗಳೂರು
ಪ್ರಾದೇಶಿಕ ಕಚೇರಿಯಿಂದ ಅನುಮತಿ ಪಡೆದರೆ ಸಾಕು. ಹೀಗಾಗಿ, ಕಳಸಾ ಹಾಗೂ ಬಂಡೂರಿ ಯೋಜನೆಗೆ ಪ್ರತ್ಯೇಕವಾಗಿ ಪ್ರಸ್ತಾವಗಳನ್ನು ಪ್ರಾದೇಶಿಕ ಕಚೇರಿಗೆ ಸಲ್ಲಿಸಲಾಗುತ್ತಿದೆ.
ಕೆಲವೇ ದಿನಗಳಲ್ಲಿ ಬಂಡೂರಿ ಯೋಜನೆಯ ಪ್ರಸ್ತಾವವನ್ನು ಪ್ರಾದೇಶಿಕ ಕಚೇರಿಗೆ ಸಲ್ಲಿಸಲಾಗುವುದು. ಪ್ರಾದೇಶಿಕ ಕಚೇರಿಯಿಂದ ತಿಂಗಳೊಳಗೆ ಒಪ್ಪಿಗೆ ಸಿಗುವ ವಿಶ್ವಾಸ ಇದೆ ಎಂದು ಕರ್ನಾಟಕ ಸರ್ಕಾರದ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ

Spread the love ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ