ಹುಬ್ಬಳ್ಳಿ, ಜನವರಿ, 08: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿಯಲ್ಲಿ ಜನವರಿ 12ರಂದು ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ರೈಲ್ವೆ ಮೈದಾನದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಹಾಗೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ಮಾಡಿ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮಕ್ಕೆ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದು, ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು.