ಕೋಲಾರ, ಡಿಸೆಂಬರ್ 09: ಈ ಬಾರಿಯ ಕರ್ನಾಟಕದ ವಿಧಾನಸಭೆ ಚುನಾವಣೆಗೂ ಮುನ್ನ ಅತಿ ಹೆಚ್ಚು ಚಾಲ್ತಿಯಲ್ಲಿರುವ ಹೆಸರು ಸಿದ್ದರಾಮಯ್ಯ. ಮಾಜಿ ಮುಖ್ಯಮಂತ್ರಿ ವರ್ಚಸ್ಸು ಇನ್ನೂ ರಾಜ್ಯದಲ್ಲಿ ಉಳಿದಿದೆ ಎಂಬುದಕ್ಕೆ ಅವರು ಹೋದ ಕಡೆಗಳಲ್ಲಿ ಸೇರುವ ಜನಸಾಗರವೇ ಸಾಕ್ಷಿ.
ಆದರೆ, ಸಿದ್ದರಾಮಯ್ಯ ಈ ಬಾರಿ ಎಲ್ಲಿಂದ ಸ್ಪರ್ಧಿಸ್ತಾರೆ ಎಂಬ ಪ್ರಶ್ನೆ ಹಲವು ತಿಂಗಳಿಂದ ಚಾಲ್ತಿಯಲ್ಲಿದೆ. ಈ ಕುರಿತು ಕೇವಲ ಮಾಧ್ಯಮ ಹಾಗೂ ರಾಜಕೀಯ ವಲಯದಲ್ಲಿ ಅಷ್ಟೇ ಅಲ್ಲ, ಸಾಮಾನ್ಯ ಜನರಲ್ಲೂ ಚರ್ಚೆಗಳು ನಡೆಯುತ್ತಿವೆ.
ಕೋಲಾರಲ್ಲಿ ಸಭೆ ನಡೆಸಲಿರುವ ಸಿದ್ದರಾಮಯ್ಯಇಂದು (ಸೋಮವಾರ) ಕೋಲಾರ ನಗರಕ್ಕೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 12.15ಕ್ಕೆ ನಗರದ ಮಿನಿ ಕ್ರೀಡಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ‘ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಸೇರಿ ಹಲವು ನಾಯಕರು ಹೇಳಿಕೆ ನೀಡಿದ್ದಾರೆ.