ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್ ಆದೇಶಿಸಿದೆ.
ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ.
ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು.
ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು ಕಲಾಪ ಮುಗಿಸಿ ನಿರ್ಗಮಿಸುತ್ತಿದ್ದಾಗ ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ| ರವಿವರ್ಮ ಕುಮಾರ್ ವಿಷಯ ಪ್ರಸ್ತಾವಿಸಿದರು. ಅರ್ಜಿಯ ವಿಚಾರಣೆಗೆ ಸಮಯದ ಅಭಾವವಿದ್ದ ಕಾರಣಕ್ಕೆ ಪ್ರಕರಣದಲ್ಲಿ ಉಭಯ ಪಕ್ಷಗಾರರು ಮುಂದಿನ ಆದೇಶದ ವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಜ. 30ಕ್ಕೆ ಮುಂದೂಡಿತು.