ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೆ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲಾ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತದ ಹೇಳಿಕೆಯಲ್ಲ. ಎಸ್ಕಾಂಗಳನ್ನು ಖಾಸಗಿಕರಣಗೊಳಿಸುವುದೇ ಈ ಸುಳ್ಳು ಭರವಸೆಯ ಹಿಂದಿರುವ ಉದ್ದೇಶ ಎಂದು ಆರೋಪಿಸಿದ್ದಾರೆ.
ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನೀವು ಅಧಿಕಾರದಲ್ಲಿದ್ದಾಗ ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9000 ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.