ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.
ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು.
ಇದೀಗ ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಕೇಂದ್ರ ಶಿಸ್ತು ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದೆ.
ಯತ್ನಾಳ್ ಸ್ವಪಕ್ಷ ನಾಯಕರ ವಿರುದ್ಧವೇ ಸಾರ್ವಜನಿಕವಾಗಿ ನೀಡಿರುವ ಹೇಳಿಕೆ ವಿಪಕ್ಷಗಳ ಟೀಕೆಗೂ ಕಾರಣವಾಗಿತ್ತು. ಯತ್ನಾಳ್ ನಡೆ ಬಿಜೆಪಿ ಹೈಕಮಾಂಡ್ಗೂ ಮುಜುಗರ ತಂದಿತ್ತು ಎನ್ನಲಾಗಿದೆ. ಹೀಗಾಗಿ ಬಸನಗೌಡ ಪಾಟೀಲ್ ಅವರಲ್ಲಿ ಕಾರಣ ಕೇಳಿ, ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿದೆ.
ಫ್ಯಾಕ್ಸ್ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ನೋಟಿಸ್ ತಲುಪಿಸಿದ್ದು, 15 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ರಾಜ್ಯದ ಶಿಸ್ತು ಸಮಿತಿಯಿಂದ ಮೂರು ದಿನಗಳ ಹಿಂದೆ ಬಸನಗೌಡ ಪಾಟೀಲ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿತ್ತು.