ನವದೆಹಲಿ: ಬಿಜೆಪಿ ಮೇಲಿನ ಜನರ ನಂಬಿಕೆ ನಿರಂತರವಾಗಿ ಕುಸಿಯುತ್ತಿದೆ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಿರುವ ಇಂದಿನ ಬಜೆಟ್ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಬಜೆಟ್ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಇದು ಕೇವಲ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡನೆ ಮಾಡಿರುವ ಬಜೆಟ್ ಇದಾಗಿದ್ದು, ದೇಶವನ್ನು ಗಮನದಲ್ಲಿರಿಸಿಕೊಂಡಿಲ್ಲ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇದು ದೂರದೃಷ್ಟಿ ಇಲ್ಲದ ಬಜೆಟ್’ ಎಂದು ಟೀಕಿಸಿದ್ದಾರೆ.
ಹಣದುಬ್ಬರ ಹಾಗೂ ದೈನಂದಿನ ವಸ್ತುಗಳ ಬೆಲೆ ಕಡಿಮೆ ಮಾಡುವ ಯಾವುದೇ ಅಂಶ ಬಜೆಟ್ನಲ್ಲಿಲ್ಲ. ಬೇಳೆಕಾಳು, ಹಾಲು, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಮೋದಿ ಸರ್ಕಾರ ದೇಶವನ್ನು ಲೂಟಿ ಮಾಡಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನರೇಗಾ ಯೋಜನೆಗೆ ₹38,468 ಕೋಟಿ ಅನುದಾನವನ್ನು ಕಡಿತಗೊಳಿಸಲಾಗಿದೆ. ಹಾಗಾದರೆ ಬಡವರ ಪಾಡೇನು? ಎಂದು ಪ್ರಶ್ನಿಸಿದ ಖರ್ಗೆ, ಬಜೆಟ್ನಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಯಾವುದೇ ಉತ್ತೇಜನ ನೀಡಿಲ್ಲ ಎಂದಿದ್ದಾರೆ.
ರೈತ ವಿರೋಧಿ ಮೋದಿ ಸರಕಾರ ರೈತರಿಗಾಗಿ ಬಜೆಟ್ನಲ್ಲಿ ಏನನ್ನೂ ನೀಡಿಲ್ಲ. 2022ರಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಲಾಗಿತ್ತು. ಅದನ್ನು ಏಕೆ ಈಡೇರಿಸಲಿಲ್ಲ? ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತ್ರಿ ಎಲ್ಲಿದೆ? ರೈತರ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಕಿಡಿಕಾರಿದ್ದಾರೆ.