ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್. ಶೀಘ್ರವೇ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ ಸೃಷ್ಟಿಸಿದ ನೋಂದಣಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲಾಗುವುದು ಇದರಿಂದ ಅಸಲಿ ವಾರಸುದಾರರಿಗೆ ನ್ಯಾಯ ಸಿಗಲಿದೆ ಎಂದು ತಿಳಿಸಿದ್ದಾರೆ.
ನಿವೇಶನ, ಮನೆ, ಕಟ್ಟಡ, ಕೃಷಿ ಭೂಮಿ ಮೊದಲಾದ ಆಸ್ತಿಗಳ ಕ್ರಯ ಪತ್ರ, ದಾನ ಪತ್ರ, ವಿಭಾಗ ಪತ್ರ, ಕರಾರು ಪತ್ರ, ಹಕ್ಕು ಬಿಡುಗಡೆ ಸಂದರ್ಭದಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಲ್ಲಿ ಅಂತಹ ದಾಖಲೆ ಪತ್ರಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೊಂದಣಾಧಿಕಾರಿಗಳಿಗೆ ನೀಡಲಾಗುತ್ತದೆ.
ನಕಲಿ ದಾಖಲೆ ಸೃಷ್ಟಿಸಿ ನೋಂದಣಿಯಾದ ದಾಖಲೆ ಪತ್ರಗಳನ್ನು ಜಿಲ್ಲಾ ನೋಂದಣಿ ಅಧಿಕಾರಿ ರದ್ದುಪಡಿಸಲಿದ್ದು, ತಪ್ಪಿತಸ್ಥರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.