ಶಿವಮೊಗ್ಗ : ಶಿವಮೊಗ್ಗ ಏರ್ ಪೋರ್ಟ್ ಗೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಶಿವಮೊಗ್ಗ ಏರ್ ಪೋರ್ಟ್ ಗೆ ನನ್ನ ಹೆಸರು ಇಡಬೇಡಿ ಎಂದು ಈಗಾಗಲೇ ಮನವಿ ಮಾಡಿದ್ದೇನೆ.
ಶಿವಮೊಗ್ಗ ಏರ್ ಪೋರ್ಟ್ ಗೆ ಕುವೆಂಪು ಹೆಸರಿಡುವಂತೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ಫೆ.27 ರಂದು ಶಿವಮೊಗ್ಗ ಏರ್ ಪೋರ್ಟ್ ಗೆ ಮೋದಿ ಬರುತ್ತಾರೆ. ಮೋದಿ ಅವರೇ ಕುವೆಂಪು ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.
ಫೆ.27 ರಂದು ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ
ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಇತ್ತೀಚೆಗೆ ಪೂರ್ವಸಿದ್ಧತಾ ಸಭೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.